ತಳವಾರ ಸಮುದಾಯದ ಬೇಡಿಕೆಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ

ಕಲಬುರಗಿ:ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಡೆದ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮಕ್ಕಾಗಿ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ತಳವಾರ ಸಮಾಜ ಸಂಘದ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಸಂತೋಷ್ ತಳವಾರ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ತಳವಾರ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ವಿಶೇಷವಾಗಿ, ಪರಿಶಿಷ್ಟ ಪಂಗಡ (ಎಸ್.ಟಿ) ಜಾತಿ ಪ್ರಮಾಣ ಪತ್ರ ವಿತರಣೆಯಲ್ಲಿ ಉಂಟಾಗಿರುವ ಅಡಚಣೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ಒತ್ತಾಯಿಸಿದರು.
ಮನವಿಯಲ್ಲಿ ತಳವಾರರು ಹಾಗೂ ಪರಿವಾರ ಜಾತಿಗಳನ್ನು ಈಗಾಗಲೇ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರಪತಿಯವರು ಪರಿಶಿಷ್ಟ ಪಂಗಡ ಪಟ್ಟಿಯಲ್ಲಿ ಸೇರಿಸಿರುವುದರಿಂದ, ಕಲಬುರಗಿ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ತಕ್ಷಣದಿಂದಲೇ ಎಸ್.ಟಿ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಲಾಗಿದೆ.
ಜಿಲ್ಲೆಯಲ್ಲಿ ತಹಸೀಲ್ದಾರರು ಕಾರಣವಿಲ್ಲದೆ ಅರ್ಜಿಗಳನ್ನು ತಿರಸ್ಕರಿಸುತ್ತಿರುವುದರಿಂದ ಬಡ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಯಿತು. ಸರ್ಕಾರ ತಕ್ಷಣ ಕ್ರಮ ಕೈಗೊಂಡು ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರತಿನಿಧಿ ಮಂಡಳಿ ಒತ್ತಾಯಿಸಿದೆ.