ಎಸ್.ಟಿ ಹಾಗೂ ಸಿಂಧುತ್ವ ಪ್ರಮಾಣ ಪತ್ರಕ್ಕಾಗಿ ಧರಣಿ ನಾಲ್ಕನೇ ದಿನ – ರಾಷ್ಟ್ರೀಯ ಸಮಾಜ ಪಕ್ಷ ಬೆಂಬಲ

ಕಲಬುರಗಿ: ಗೊಂಡ ಸಮುದಾಯಕ್ಕೆ ಸಿಂಧುತ್ವ ಪ್ರಮಾಣ ಪತ್ರ ನೀಡದೆ ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ತೊಂದರೆ ನೀಡುತ್ತಿರುವುದನ್ನು ವಿರೋಧಿಸಿ, ಆದಿವಾಸಿ ಅಲೆಮಾರಿ ಬುಡಕಟ್ಟು ಮೂಲ ನಿವಾಸಿ ಸಂಘಟನೆಯ ಜಿಲ್ಲಾ ಘಟಕದ ನೇತೃತ್ವದಲ್ಲಿ ನಡೆಯುತ್ತಿರುವ ಆಹೋರಾತ್ರಿ ಧರಣಿ ಸತ್ಯಾಗ್ರಹ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಈ ಧರಣಿಗೆ ರಾಷ್ಟ್ರೀಯ ಸಮಾಜ ಪಕ್ಷದ ಮುಖಂಡರು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು. ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ದೇವೇಂದ್ರ ಚಿಗರಳ್ಳಿ ಮಾತನಾಡಿ, ಪರಿಶಿಷ್ಟ ಪಂಗಡದಲ್ಲಿ ಸೇರಿರುವ ಗೊಂಡ, ಕಾಡು ಕುರುಬ, ಜೇನುಕುರುಬ, ಬೆಟ್ಟ ಕುರುಬ, ಗೊಂಡ ಕುರುಬ ಹಾಗೂ ತಳವಾರ ಸಮುದಾಯದವರಿಗೆ ಎಸ್.ಟಿ ಪ್ರಮಾಣ ಪತ್ರ ಹಾಗೂ ಸಿಂಧುತ್ವ ಪ್ರಮಾಣ ಪತ್ರ ನೀಡುವಲ್ಲಿ ಅಧಿಕಾರಿಗಳು ಅನಗತ್ಯ ವಿಳಂಬ ಮಾಡುತ್ತಿದ್ದಾರೆ. ಇದನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿಯ ಎದುರು ಧರಣಿ ನಡೆಯುತ್ತಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬ ಮುಂದುವರಿದರೆ ನಮ್ಮ ಪಕ್ಷ ಉಗ್ರ ಹೋರಾಟ ಕೈಗೊಳ್ಳಲಿದೆ ಎಂದು ಎಚ್ಚರಿಸಿದರು.
ರಾಷ್ಟ್ರೀಯ ಸಮಾಜ ಪಕ್ಷದ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ರೇಣುಕಾ ಹೋರಕೇರಿ ಮಾತನಾಡಿ, “ಸಂವಿಧಾನ ಬದ್ಧ ಹಕ್ಕುಗಳನ್ನು ಕಿತ್ತುಕೊಳ್ಳುವ ಕ್ರಮ ನಿಲ್ಲಿಸಿ, ಗೊಂಡ ಹಾಗೂ ಕುರುಬ ಸಮುದಾಯಗಳಿಗೆ ತಕ್ಷಣ ಪ್ರಮಾಣ ಪತ್ರ ನೀಡಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣಬಸಪ್ಪ ದೊಡ್ಮನಿ, ಜಿಲ್ಲಾಧ್ಯಕ್ಷ ಶ್ರೀಮಂತ ಮಾವನೂರ, ಸಂಘಟನಾ ಕಾರ್ಯದರ್ಶಿ ವಿಜಯ ಕುಮಾರ ಬೋರಗಿ, ರಾಜ್ಯ ಯುವ ಘಟಕದ ಉಪಾಧ್ಯಕ್ಷ ಡಾ. ಶರಣು ಬಿ. ಹೊನ್ನಗೆಜ್ಜಿ, ಆದಿವಾಸಿ ಅಲೆಮಾರಿ ಬುಡಕಟ್ಟು ಮೂಲ ನಿವಾಸಿ ಸಂಘಟನೆಯ ಜಿಲ್ಲಾಧ್ಯಕ್ಷ ಗೋಪಾಲ್ ಎಂ.ಪಿ., ಡಾ. ಚಂದ್ರಕಾಂತ ಗಂವ್ಹಾರ್, ಗೀತಾ ಬಿದನೂರು ಸೇರಿದಂತೆ ಹಲವರು ಭಾಗವಹಿಸಿದ್ದರು.