ಡಾ. ಅಜಯ್ ಸಿಂಗ್ಗೆ ಸಚಿವ ಸ್ಥಾನ: ಕಾಶಿನಾಥ ಹಂಗರಗಿ ಹರ್ಷ

ಕಲಬುರಗಿ: ಜೇವರ್ಗಿ ಕ್ಷೇತ್ರದ ಶಾಸಕ ಡಾ. ಅಜಯ್ ಸಿಂಗ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆತಿರುವುದಕ್ಕೆ ಕಾಂಗ್ರೆಸ್ ಮುಖಂಡ ಕಾಶಿನಾಥ ಹಂಗರಗಿ ಹರ್ಷ ವ್ಯಕ್ತಪಡಿಸಿದ್ದಾರೆ.
ಸೋಮವಾರ ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರವು ಕಲ್ಯಾಣ ಕರ್ನಾಟಕ ಭಾಗಕ್ಕೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ತಿಳಿಸಿದ್ದಾರೆ.
ಡಾ. ಅಜಯ್ ಸಿಂಗ್ ಅವರು ಸತತ ಮೂರು ಬಾರಿ ಜೇವರ್ಗಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದು, ಜನಪರ ಆಡಳಿತ ಮತ್ತು ಅಭಿವೃದ್ಧಿ ಪರ ದೃಷ್ಟಿಕೋನದಿಂದ ಜನರ ವಿಶ್ವಾಸ ಗಳಿಸಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿದ್ದ ವೇಳೆ ಹಲವು ಅಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ ಅನುಭವ ಅವರಿಗೆ ಇದೆ ಎಂದು ಹಂಗರಗಿ ಹೇಳಿದ್ದಾರೆ.
ಸಚಿವರಾಗಿ ನೀರಾವರಿ, ಶಿಕ್ಷಣ, ಆರೋಗ್ಯ, ಉದ್ಯೋಗ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಡಾ. ಅಜಯ್ ಸಿಂಗ್ ಆದ್ಯತೆ ನೀಡಲಿದ್ದು, ಅವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಭಾಗ ಹಾಗೂ ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಡಾ. ಅಜಯ್ ಸಿಂಗ್ ಅವರಿಗೆ ಸಚಿವ ಸ್ಥಾನ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಹೈಕಮಾಂಡ್ ಹಾಗೂ ಪಕ್ಷದ ಹಿರಿಯ ನಾಯಕರಿಗೆ ಕಾಶಿನಾಥ ಹಂಗರಗಿ ಅಭಿನಂದನೆ ಸಲ್ಲಿಸಿದ್ದು, ಸಚಿವರಾಗಿ ಯಶಸ್ವಿ ಆಡಳಿತ ನಡೆಸುವಂತೆ ಶುಭ ಹಾರೈಸಿದ್ದಾರೆ.



