ರಾಜ್ಯ

ಹಿಂದುಳಿದ 11 ಜಿಲ್ಲೆಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ: ‘ಉದ್ಯೋಗ ನಿಧಿ’ಗೆ ಸಂಪುಟ ಅಸ್ತು

ಬೆಂಗಳೂರು: ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ಸಮತೋಲಿತ ಪ್ರಾದೇಶಿಕ ಅಭಿವೃದ್ಧಿ ಹಾಗೂ ಸ್ಥಳೀಯ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಉದ್ಯೋಗ ನಿಧಿ’ ಯೋಜನೆ ಜಾರಿಗೆ ತರಲು ಮುಂದಾಗಿದೆ.

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಈ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.

ಯೋಜನೆಯಡಿ ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ, ಬಾಗಲಕೋಟೆ ಸೇರಿದಂತೆ ರಾಜ್ಯದ 11 ಕಡಿಮೆ ಅಭಿವೃದ್ಧಿ ಹೊಂದಿರುವ ಜಿಲ್ಲೆಗಳಲ್ಲಿ ಒಂದು ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ.

ಹಿಂದುಳಿದ ಜಿಲ್ಲೆಗಳಲ್ಲೇ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಮೂಲಕ ಉದ್ಯೋಗ ಅರಸಿ ಯುವಜನರು ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಯುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

₹305 ಕೋಟಿ ವಾರ್ಷಿಕ ಅನುದಾನ

‘ಉದ್ಯೋಗ ನಿಧಿ’ ಯೋಜನೆಗಾಗಿ ರಾಜ್ಯ ಸರ್ಕಾರ ವಾರ್ಷಿಕ ₹305 ಕೋಟಿ ಅನುದಾನ ಮೀಸಲಿಡಲಿದೆ. ಯೋಜನೆಯಡಿ ಅರ್ಹ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (MSME) ಹಾಗೂ ಕೈಗಾರಿಕಾ ಸಂಸ್ಥೆಗಳು ನೇಮಕ ಮಾಡಿಕೊಳ್ಳುವ ಪ್ರತಿ ಹೆಚ್ಚುವರಿ ಉದ್ಯೋಗಿಗೆ ತಿಂಗಳಿಗೆ ₹2,500ರಂತೆ ಗರಿಷ್ಠ 24 ತಿಂಗಳವರೆಗೆ ಸರ್ಕಾರದಿಂದ ಪ್ರೋತ್ಸಾಹಧನ ನೀಡಲಾಗುತ್ತದೆ.

ಹೊಸದಾಗಿ ಉದ್ಯೋಗ ಸೃಷ್ಟಿಯಾಗಿರುವುದು ಹಾಗೂ ಸಂಬಂಧಿತ ಉದ್ಯೋಗಿಗಳಿಗೆ ನಿಯಮಿತವಾಗಿ ವೇತನ ಪಾವತಿಯಾಗುತ್ತಿರುವುದನ್ನು ಸಮಗ್ರವಾಗಿ ಪರಿಶೀಲಿಸಿದ ಬಳಿಕವೇ ಸರ್ಕಾರದ ಆರ್ಥಿಕ ನೆರವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯುವ ನಿಧಿಯೊಂದಿಗೆ ಸಮನ್ವಯ

‘ಉದ್ಯೋಗ ನಿಧಿ’ ಯೋಜನೆಯನ್ನು ಸರ್ಕಾರದ ‘ಯುವ ನಿಧಿ’ ಯೋಜನೆಯೊಂದಿಗೆ ಸಮನ್ವಯಗೊಳಿಸಿ ಜಾರಿಗೆ ತರಲಾಗುತ್ತಿದೆ. ಯುವಜನರಿಗೆ ತಮ್ಮದೇ ಜಿಲ್ಲೆಗಳಲ್ಲಿ ಉದ್ಯೋಗ ದೊರಕುವಂತೆ ಮಾಡುವುದಕ್ಕೆ ಆದ್ಯತೆ ನೀಡಲಾಗಿದೆ.

ಯೋಜನೆಯಿಂದ ಹಿಂದುಳಿದ ಜಿಲ್ಲೆಗಳ ಕೈಗಾರಿಕಾ ವಲಯಕ್ಕೆ ಉತ್ತೇಜನ ದೊರೆಯುವುದರ ಜೊತೆಗೆ ಸ್ಥಳೀಯ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುವ ನಿರೀಕ್ಷೆಯಿದೆ. ಇದರ ಮೂಲಕ ರಾಜ್ಯದಲ್ಲಿ ಸಮತೋಲಿತ ಪ್ರಾದೇಶಿಕ ಅಭಿವೃದ್ಧಿಗೆ ಹಾಗೂ ಒಟ್ಟಾರೆ ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡಲಿದೆ ಎಂದು ಸರ್ಕಾರ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button