ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬಿಜೆಪಿ ಯುವ ಮೋರ್ಚಾದಿಂದ ಬೈಕ್ ರ್ಯಾಲಿ

ಕಲಬುರಗಿ, ಆ.14: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಕ್ಷದ ಕಲಬುರಗಿ ಮಹಾನಗರ ಜಿಲ್ಲಾ ಯುವ ಮೋರ್ಚಾ ವತಿಯಿಂದ ಶನಿವಾರ ನಗರದಲ್ಲಿ ದೇಶಭಕ್ತಿ ಹಾಗೂ ರಾಷ್ಟ್ರೀಯ ಏಕತೆಯ ಸಂದೇಶ ಸಾರುವ ಬೈಕ್ ರ್ಯಾಲಿ ಆಯೋಜಿಸಲಾಯಿತು.
ನಗರದ ನೇತಾಜಿ ಚೌಕದಿಂದ ಆರಂಭವಾದ ರ್ಯಾಲಿಯು ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಪಟೇಲ್ ಸರ್ಕಲ್ವರೆಗೆ ಸಾಗಿತು. ಬಿಜೆಪಿ ಮಹಾನಗರ ಜಿಲ್ಲಾ ಅಧ್ಯಕ್ಷ ಚಂದು ಪಾಟೀಲ್ ಹಾಗೂ ಯುವ ಮೋರ್ಚಾ ಮಹಾನಗರ ಜಿಲ್ಲಾ ಅಧ್ಯಕ್ಷ ಮಹೇಶ್ ಚವ್ಹಾಣ್ ಅವರ ನೇತೃತ್ವದಲ್ಲಿ ರ್ಯಾಲಿ ನಡೆಯಿತು.
ರ್ಯಾಲಿಯಲ್ಲಿ ಬಿಜೆಪಿ ಜಿಲ್ಲಾ ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಪಕ್ಷದ ಮುಖಂಡರು, ಮಹಾನಗರ ಪಾಲಿಕೆ ಸದಸ್ಯರು, ಕಾರ್ಯಕರ್ತರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.
ರ್ಯಾಲಿಯುದ್ದಕ್ಕೂ ‘ಭಾರತ್ ಮಾತಾ ಕೀ ಜೈ’, ‘ವಂದೇ ಮಾತರಂ’ ಸೇರಿದಂತೆ ದೇಶಭಕ್ತಿ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ರಾಷ್ಟ್ರೀಯ ಧ್ವಜ ಹಿಡಿದು ಉತ್ಸಾಹದಿಂದ ಸಾಗಿದರು.
ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ ಯುವಜನರಲ್ಲಿ ದೇಶಭಕ್ತಿ, ರಾಷ್ಟ್ರೀಯ ಏಕತೆ ಹಾಗೂ ರಾಷ್ಟ್ರದ ಬಗ್ಗೆ ಗೌರವದ ಭಾವನೆ ಬೆಳೆಸುವ ಉದ್ದೇಶದಿಂದ ಬೈಕ್ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ಮುಖಂಡರು ತಿಳಿಸಿದರು.



