ಬಂಜಾರಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ; ಸಾಧಕರಿಗೆ ಸನ್ಮಾನ

ಕಲಬುರಗಿ: ಬಂಜಾರಾ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರ ಸಂಘ ಹಾಗೂ ಗೋರಸಿಕವಾಡಿ, ಕಲಬುರಗಿ ಜಿಲ್ಲಾ ಘಟಕದ ವತಿಯಿಂದ 2026-27ನೇ ಸಾಲಿನ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಗರದಲ್ಲಿರುವ ಬಂಜಾರಾ ಭವನದಲ್ಲಿ ಶನಿವಾರ ಸಂಭ್ರಮದಿಂದ ನಡೆಯಿತು.
10ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗೆ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಬಂಜಾರಾ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು. ಇದೇ ಸಂದರ್ಭದಲ್ಲಿ ಬಡ್ತಿ ಪಡೆದ, ನಿವೃತ್ತರಾದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪರಮಪೂಜ್ಯ ಪರ್ವತಲಿಂಗ ಪರಮೇಶ್ವರ ಮಹಾರಾಜರು, ಸೋನಾಳಗಿರಿ ಬೇಡಸೂರ ಹಾಗೂ ಪರಮಪೂಜ್ಯ ಅಪ್ಪಾರಾವ್ ದೇವಿ ಮುತ್ಯಾ, ಕೊಲ್ಲಾಪುರ ಮಹಾಲಕ್ಷ್ಮಿ ಶಕ್ತಿ ಪೀಠದ ಶ್ರೀನಿವಾಸ ಸರಡಗಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ಜರುಗಿತು. ಪರಮಪೂಜ್ಯ ಬಲಿರಾಮ ಮಹಾರಾಜರು ಹಾಗೂ ಸೇವಾಲಾಲ್ ಮಹಾರಾಜರ ಸಾನ್ನಿಧ್ಯವೂ ಇತ್ತು.
ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಂಪ್ರಭು ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡಬೇಕು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಇಂತಹ ಕಾರ್ಯಕ್ರಮಗಳು ಯುವಜನರಲ್ಲಿ ಸಾಧನೆಯ ಹಂಬಲ ಹೆಚ್ಚಿಸುತ್ತವೆ ಎಂದರು.
ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಮಾತನಾಡಿ, ಶಿಕ್ಷಣವೇ ಸಮಾಜದ ಅಭಿವೃದ್ಧಿಯ ಪ್ರಮುಖ ಸಾಧನವಾಗಿದ್ದು, ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯೊಂದಿಗೆ ಸಾಮಾಜಿಕ ಜವಾಬ್ದಾರಿಯನ್ನೂ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಚಿಂಚೋಳಿ ಶಾಸಕ ಡಾ. ಅವಿನಾಶ ಜಾಧವ, ಮಾಜಿ ಸಚಿವ ರೇವುನಾಯಕ ಬೆಳಮಗಿ ಸೇರಿದಂತೆ ಗಣ್ಯರು ಮಾತನಾಡಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ದೊರೆತರೆ ಅವರು ಇನ್ನಷ್ಟು ಎತ್ತರಕ್ಕೆ ಬೆಳೆಯಲು ಸಾಧ್ಯ ಎಂದರು.
ಬಂಜಾರಾ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಹರಿಶ್ಚಂದ್ರ ಎಸ್. ರಾಠೋಡ್ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕ್ಷೇತ್ರಗಳ ಗಣ್ಯರು, ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸುವುದರ ಜೊತೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಗೌರವಿಸುವ ಮೂಲಕ ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರವೇರಿತು.



