ಕಲಬುರಗಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಹೊಸ ನಾಯಕತ್ವ! ಜಿಲ್ಲಾಧ್ಯಕ್ಷರಾಗಿ ಜಗದೀಶ ಎಸ್. ಸಾಗರ ನೇಮಕ

ಕಲಬುರಗಿ: ಆಮ್ ಆದ್ಮಿ ಪಕ್ಷದ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಜಗದೀಶ ಎಸ್. ಸಾಗರ ಅವರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಜೂನ್ 19ರಂದು ಬೆಂಗಳೂರಿನ ಪಕ್ಷದ ರಾಜ್ಯ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದಲ್ಲಿ ತಮ್ಮನ್ನು ಕಲಬುರಗಿ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಹೇಳಿದರು.
ನೇಮಕಾತಿ ಪತ್ರದಲ್ಲಿ ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡು ಪಕ್ಷವನ್ನು ಸಂಘಟನಾತ್ಮಕವಾಗಿ ಬಲಪಡಿಸುವುದು, ವಿದ್ಯಾರ್ಥಿಗಳು, ಮಹಿಳೆಯರು, ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರ ಮೇಲೆ ನಡೆಯುವ ಅನ್ಯಾಯಗಳ ವಿರುದ್ಧ ಹೋರಾಟ ನಡೆಸಿ ಅವರಿಗೆ ನ್ಯಾಯ ದೊರಕಿಸಲು ಶ್ರಮಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಜುಲೈ 25ರಂದು ಚಿತ್ತಾಪುರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಅವರು ಹೇಳಿದರು.
ದೊಡ್ಡಪ್ಪ ತಂದೆ ಗುಂಡಪ್ಪ ಅವರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಪರಮೇಶ್ವರ ಎಸ್. ಮತ್ತಿಮೂಡ ಅವರನ್ನು ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ, ನಾಗರಾಜ ಬಿ. ಹಡಪದ ಅವರನ್ನು ಚಿತ್ತಾಪುರ ತಾಲೂಕು ಅಧ್ಯಕ್ಷರಾಗಿ, ಶಿವಯೋಗಿ ಪೂಜಾರಿ ಅವರನ್ನು ಶಹಾಬಾದ್ ತಾಲೂಕು ಅಧ್ಯಕ್ಷರಾಗಿ, ಶರಣಪ್ಪ ತಂದೆ ದೇವಿಂದ್ರಪ್ಪ ಕಟ್ಟಾ ಅವರನ್ನು ಸೇಡಂ ತಾಲೂಕು ಅಧ್ಯಕ್ಷರಾಗಿ ಹಾಗೂ ಶ್ರೀಕಾಂತ ಖಾನಾಪೂರ ಅವರನ್ನು ಚಿಂಚೋಳಿ ತಾಲೂಕಿನ ಎಸ್ಸಿ–ಎಸ್ಟಿ ವಿಭಾಗದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ವಿವರಿಸಿದರು.
ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಜಿಲ್ಲೆಯಾದ್ಯಂತ ಜನಪರ ಚಟುವಟಿಕೆಗಳನ್ನು ಹಮ್ಮಿಕೊಳ್ಳ ಲಾಗುವುದು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಹೋರಾಟದ ಮೂಲಕ ಪರಿಹಾರ ಕಂಡುಕೊಳ್ಳಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೊಡ್ಡಪ್ಪ ತಂದೆ ಗುಂಡಪ್ಪ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಪರಮೇಶ್ವರ ಎಸ್. ಮತ್ತಿಮೂಡ, ಚಿತ್ತಾಪುರ ತಾಲೂಕು ಅಧ್ಯಕ್ಷ ನಾಗರಾಜ ಬಿ. ಹಡಪದ, ಶಹಾಬಾದ್ ತಾಲೂಕು ಅಧ್ಯಕ್ಷ ಶಿವಯೋಗಿ ಪೂಜಾರಿ, ಸೇಡಂ ತಾಲೂಕು ಅಧ್ಯಕ್ಷ ಶರಣಪ್ಪ ತಂದೆ ದೇವಿಂದ್ರಪ್ಪ ಕಟ್ಟಾ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.



