ಪೊಲೀಸರಿಗೆ ರಾಖಿ ಕಟ್ಟಿ ರಕ್ಷಾಬಂಧನ ಆಚರಣೆ

ಕೆಂಭಾವಿ: ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕರ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಮತ್ತು ಗೃಹ ರಕ್ಷಕ ಸಿಬ್ಬಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) ವತಿಯಿಂದ ರಕ್ಷಾಬಂಧನ ಆಚರಿಸಲಾಯಿತು.
ಕೆಂಭಾವಿ ಪೊಲೀಸ್ ಠಾಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ರೈಂ ಪಿಎಸ್ಐ ಹಣಮಂತರಾಯ ಸೇರಿದಂತೆ ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗೃಹ ರಕ್ಷಕರಿಗೆ ರಾಖಿ ಕಟ್ಟಿ, ಸಿಹಿ ತಿನ್ನಿಸಿ ಹಬ್ಬದ ಶುಭಾಶಯ ಕೋರಲಾಯಿತು.
ಹಬ್ಬ-ಹರಿದಿನಗಳಲ್ಲಿಯೂ ವಿಶ್ರಾಂತಿ ಇಲ್ಲದೆ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರ ಸುರಕ್ಷತೆ ಹಾಗೂ ಸಮಾಜದ ಶಾಂತಿ ಕಾಪಾಡುವ ಪೊಲೀಸ್ ಮತ್ತು ಗೃಹ ರಕ್ಷಕ ಸಿಬ್ಬಂದಿಯ ನಿಸ್ವಾರ್ಥ ಸೇವೆಯನ್ನು ಈ ಸಂದರ್ಭದಲ್ಲಿ ಶ್ಲಾಘಿಸಲಾಯಿತು. ಅವರ ಸೇವೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.
ಸಹೋದರಿಯರ ಪ್ರೀತಿ, ವಿಶ್ವಾಸ ಮತ್ತು ಆತ್ಮೀಯತೆಯ ಸಂಕೇತವಾದ ರಕ್ಷಾಬಂಧನವನ್ನು ರಕ್ಷಣಾ ಸಿಬ್ಬಂದಿಯೊಂದಿಗೆ ಆಚರಿಸುವ ಮೂಲಕ ಕಾರ್ಯಕ್ರಮವು ವಿಶೇಷ ಅರ್ಥ ಪಡೆದುಕೊಂಡಿತು. ಕಾರ್ಯಕ್ರಮಕ್ಕೆ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ, ಯೋಜನೆಯ ಪದಾಧಿಕಾರಿಗಳು ಹಾಗೂ ಸೇವಾ ಪ್ರತಿನಿಧಿಗಳಿಗೆ ಧನ್ಯವಾದ ಸಲ್ಲಿಸಿದರು.
ಯೋಜನೆಯ ಕೆಂಭಾವಿ ವಲಯ ಮೇಲ್ವಿಚಾರಕಿ ಮಹಾದೇವಿ, ಸೇವಾ ಪ್ರತಿನಿಧಿಗಳಾದ ಶಶಿಕಲಾ, ಶ್ವೇತಾ, ವಿಜಯಲಕ್ಷ್ಮಿ, ಚನ್ನಮ್ಮ, ಮಹಾದೇವಿ, ಶಿವಲೀಲಾ, ಖಾದರ್ ಬಿ. ಸೇರಿದಂತೆ ಹಲವರು ಉಪಸ್ಥಿತರಿದ್ದರು.



