ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

ಕಲಬುರಗಿ: ನಗರದ ಪಿ.ಎಂ. ಶ್ರೀ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಶಾಲಾ ಸಮಯದಲ್ಲಿ ಉಂಟಾಗುತ್ತಿರುವ ಸಾರಿಗೆ ಸಮಸ್ಯೆಯನ್ನು ಪರಿಹರಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಹಾಗೂ ಶಾಲಾ ಎಸ್ಡಿಎಂಸಿ ವತಿಯಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಶಾಲೆಯಲ್ಲಿ ಪ್ರಸ್ತುತ 533 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಪ್ರತಿನಿತ್ಯ ಶಾಲೆಗೆ ಬರುವ ಮತ್ತು ಶಾಲೆ ಮುಗಿದ ನಂತರ ಮನೆಗೆ ತೆರಳುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ.
ವಿಶೇಷವಾಗಿ ಮಧ್ಯಾಹ್ನ ಶಾಲೆ ಮುಗಿದ ಬಳಿಕ ವಿದ್ಯಾರ್ಥಿಗಳು ಬಸ್ಗಾಗಿ ಹೆಚ್ಚಿನ ಸಮಯ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಅನುಕೂಲದ ದೃಷ್ಟಿಯಿಂದ ಶಾಲಾ ಸಮಯಕ್ಕೆ ಅನುಗುಣವಾಗಿ ಹೆಚ್ಚುವರಿ ಬಸ್ಗಳನ್ನು ಒದಗಿಸಬೇಕು, ಬಸ್ಗಳ ಸಮಯವನ್ನು ಶಾಲೆಯ ಆರಂಭ ಮತ್ತು ಮುಕ್ತಾಯದ ಸಮಯಕ್ಕೆ ಹೊಂದಾಣಿಕೆ ಮಾಡಬೇಕು ಎಂದು ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ರಾಜು ಕುಂಬಾರ, ಬಸವರಾಜ ಪಾಟೀಲ, ಚಂದ್ರಕಾಂತ ಪಾಟೀಲ, ಆದಪ್ಪ ಜಮಾದಾರ, ಗಾಯತ್ರಿ ವಿ. ಸುತಾರ, ಗುಂಡಮ್ಮ ಕುಂಬಾರ, ಸೋಮಶೇಖರ ರಡ್ಡಿ, ಅಯ್ಯರ್ ಸಿಂಗ್, ಕೃಷ್ಣಮುನಿಸ್ಟರ್, ಇಬ್ರಾಹಿಂ ಜಮಾದಾರ, ಪಿ. ಭೀಮಶಿ, ಕೇದಾರ ಕಾಂತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಜಯ ಕರ್ನಾಟಕ ಸಂಘಟನೆಯ ಡಾ. ಶಿವಕುಮಾರ ಶರ್ಮಾ ಹಾಗೂ ಮಲ್ಲಿಕಾರ್ಜುನ ಎಸ್. ಸಾರವಾಡ ಸೇರಿದಂತೆ ಪದಾಧಿಕಾರಿಗಳು ವಿದ್ಯಾರ್ಥಿಗಳ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದರು.



