ಜನಪರ ಹಾಗೂ ಜೀವಪರ ಬಜೆಟ್: ಯಾದಗಿರಿ ಅಭಿವೃದ್ಧಿಗೆ ಹಲವು ಯೋಜನೆಗಳು – ಡಾ. ಎಸ್.ಬಿ. ಕಾಮರಡ್ಡಿ

ಯಾದಗಿರಿ: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ಜನಪರ ಹಾಗೂ ಜೀವಪರವಾಗಿದ್ದು, “ಸರ್ಕಾರದ ನಡೆ ಜನರ ಕಡೆ” ಎಂಬ ನಿಟ್ಟಿನಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಘೋಷಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಡಾ. ಎಸ್.ಬಿ. ಕಾಮರಡ್ಡಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಯಾದಗಿರಿ ಜಿಲ್ಲೆಯ ಜನರ ಆರೋಗ್ಯದ ಹಿತದೃಷ್ಟಿಯಿಂದ ಯಿಮ್ಸ್ ಆವರಣದಲ್ಲಿ 200 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿರುವುದು ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಬಹುಕಾಲದ ಬೇಡಿಕೆಯಾಗಿದ್ದ ಯಾದಗಿರಿ ನಗರಕ್ಕೆ ಒಳಚರಂಡಿ (ಯುಜಿಡಿ) ಕಾಮಗಾರಿಗೆ ಸುಮಾರು ₹200 ಕೋಟಿ ವೆಚ್ಚದ ಯೋಜನೆ ಘೋಷಿಸಿರುವುದು ಜಿಲ್ಲೆಗೆ ಸರ್ಕಾರ ನೀಡಿರುವ ಮಹತ್ವದ ಕಾಣಿಕೆಯಾಗಿದೆ ಎಂದು ಅವರು ಹೇಳಿದರು.
ರಾಜ್ಯ ಬಜೆಟ್ನಲ್ಲಿ ಯಾದಗಿರಿ ಜಿಲ್ಲೆಗೆ ಹಲವು ಯೋಜನೆಗಳು ದೊರೆತಿದ್ದು, ಕಕ್ಕೇರಾದಲ್ಲಿ ₹18 ಕೋಟಿ ವೆಚ್ಚದಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜು ಸ್ಥಾಪನೆ, ₹100 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ, ಯಾದಗಿರಿ ಜಿಲ್ಲೆಯಲ್ಲಿ ತಾರಾಲಯ ಸ್ಥಾಪನೆಗೆ ಅನುದಾನ, ಕರ್ನಾಳ್ ಏತ ನೀರಾವರಿ ಯೋಜನೆಗೆ ಒತ್ತು ಹಾಗೂ ಜಿಲ್ಲೆಯ ಸಣ್ಣ ನೀರಾವರಿ ಕಾಮಗಾರಿಗಳಿಗೆ ಅನುದಾನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇದಲ್ಲದೆ ಕಕ್ಕೇರಾದಲ್ಲಿ ನೂತನ ಪೊಲೀಸ್ ಠಾಣೆ ಸ್ಥಾಪನೆಗೂ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಈ ಎಲ್ಲಾ ಯೋಜನೆಗಳು ಯಾದಗಿರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನೆರವಾಗಲಿವೆ ಎಂದು ಡಾ. ಎಸ್.ಬಿ. ಕಾಮರಡ್ಡಿ ತಿಳಿಸಿದ್ದಾರೆ.



